ಬೆಳ್ತಂಗಡಿ:ಶಾಸಕ ಹರೀಶ್ ಪೂಂಜಾ ವಿರುದ್ಧ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ವಾಗ್ದಾಳಿಯನ್ನು ನಡೆಸಿದ್ದಾರೆ.
ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿ, ಹರೀಶ್ ಪೂಂಜಾ ತನ್ನ ಹುಡುಗರಿಗೆ ಕೇಸರಿ ಶಾಲು ಹಾಕಿಸಿ ಗೋವುಗಳನ್ನು ಇಂದು ಕಸಾಯಿಖಾನೆಗೆ ತಲುಪಿಸುವ ಕೆಲಸ ಮಾಡಿಸುತ್ತಿದ್ದಾರೆ. ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಹರೀಶ್ ಪೂಂಜಾ ಹಿಂದೂ ಸಮಾಜಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಹರೀಶ್ ಪೂಂಜಾ ಬೆಳ್ತಂಗಡಿ ಶಾಸಕರಾಗಿ ಅಧಿಕಾರ ಸ್ವೀಕರಿಸಿದ ನಂತರ ತಾಲೂಕಿನಲ್ಲಿ ಮತಾಂತರ, ಗೋಹತ್ಯೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಅವರ ಕಚೇರಿಯಿಂದಲೇ ಬಿಜೆಪಿ ಮುಖಂಡನೋರ್ವ ದನ ಸಾಗಾಟದಲ್ಲಿ ತೊಡಗಿದ್ದಾರೆ ಎಂದು ಅರೋಪಿಸಿದ್ದಾರೆ.
ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತ ಹತ್ಯೆ ಮಾಡಿದ್ದಾರೆ ಎಂದ ಶಾಸಕ ಹರೀಶ್ ಪೂಂಜಾ ವಿರುದ್ದ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ ಇಲ್ಲವಾದರೆ ಈ ಆರೋಪ ಒಪ್ಪಿಕೊಂಡು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಲಿ ಎಂದು ಅವರು ಹೇಳಿದ್ದಾರೆ.
ಇದಲ್ಲದೆ ಸಮಾಜದಲ್ಲಿ ಸುಳ್ಳು ಹೇಳಿಕೆ ನೀಡಿ ಸಮಾಜದ ಒಡೆಯುವ ಕೆಲಸ ಮಾಡಿದ ಶಾಸಕರ ವಿರುದ್ದ ಹಿಂದೂ ಸಂಘಟನೆ ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.