2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಸೋಲನ್ನು ಕಂಡಿದೆ.ಇದರಿಂದ ಕಂಗಾಲಾಗಿರುವ ಬಿಜೆಪಿ ಇದೀಗ ಲೋಕಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿದೆ.ಹೇಗಾದರೂ ಮಾಡಿ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ವಶಪಡಿಸಿಕೊಳ್ಳಲು ತಂತ್ರ ನಡೆಸುತ್ತಿದೆ.
ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ಗೆ ಟಕ್ಕರ್ ಕೊಡಲು ಬಿಜೆಪಿ ಪಕ್ಷವೂ ಜೆಡಿಎಸ್ ಜೊತೆಗೆ ಮೈತ್ರಿಗೆ ಚಿಂತನೆ ನಡೆಸಿದೆ ಎಂಬ
ಮಾತುಗಳು ಕೇಳಿ ಬರುತ್ತಿದೆ.ಇದರ ಬೆನ್ನಲೇ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಬಿಜೆಪಿ ಮೈತ್ರಿ ಆಗಬಹುದು ಅಂದುಕೊಂಡಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಶುಕ್ರವಾರ ನಡೆದ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಕಳೆದ ಸಲಕ್ಕಿಂತಲೂ ಹೆಚ್ಚು ಮಂದಿಯನ್ನು ಗೆಲ್ಲಿಸಬೇಕಿದೆ.
ಒಂದಿಷ್ಟು ಬದಲಾವಣೆ ಜತೆಗೆ ಚುನಾವಣೆ ಎದುರಿಸುತ್ತೇವೆ ಎಂದ ಯೋಗೀಶ್ವರ್ ಈ ಕುರಿತು ಪಕ್ಷದ ಹೈಕಮಾಂಡ್ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದೆ. ಅವರ ನಿರ್ಧಾರಕ್ಕೆ ಬದ್ಧರಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.
ಲೋಕಸಮರಕ್ಕೆ ಜೆಡಿಎಸ್ ಜೊತೆಗಿನ ಮೈತ್ರಿಗೆ ಮುಂದಾದರೆ ಜೆಡಿಎಸ್ ಗೆ 5 ರಿಂದ 6 ಕ್ಷೇತ್ರಗಳನ್ನು ಬಿಟ್ಟುಕೊಟ್ಟು ಇನ್ನುಳಿದ ಕ್ಷೇತ್ರದಲ್ಲಿ ಜೆಡಿಎಸ್ ಸಂಪೂರ್ಣ ಬೆಂಬಲವನ್ನು ಬಿಜೆಪಿ ಪಡೆಯುವ ಬಗ್ಗೆ ಆಲೋಚನೆ ಇದೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಕುಮಾರಸ್ವಾಮಿ, 2024 ರ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ವಿಚಾರವಾಗಿ ಯಾವುದೇ ಚರ್ಚೆ ಆಗಿಲ್ಲ. ರಾಜಕಾರಣದಲ್ಲಿ ಚರ್ಚೆ,ಊಹಾಪೋಹಗಳು ಸಹಜ. ಇದು ಗಾಳಿ ಸುದ್ದಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಇದಲ್ಲದೆ ಈ ಮೊದಲು ಲೋಕಸಭೆ ಚುನಾವಣೆಗೆ ಸ್ವಂತ ಬಲದಲ್ಲಿ ಹೋರಾಟ ಮಾಡುತ್ತೇವೆ ಎಂದು ದೇವೇಗೌಡರು ಕೂಡ ಹೇಳಿದ್ದರು.