ಬಿಜೆಪಿ ಮುಖಂಡನ ಮೃತದೇಹ ನಿರ್ಜನ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಕೊಲೆ ಆರೋಪ ಮಾಡಿದ ಕುಟುಂಬ
ಜಾರ್ಖಂಡ್;ಪಲಮು ಜಿಲ್ಲೆಯಲ್ಲಿ ಬಿಜೆಪಿ ಮುಖಂಡನ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಬಿಜೆಪಿಯ ಎಸ್ಸಿ ಮನಾಟು ಮಂಡಲದ ಅಧ್ಯಕ್ಷ ಪ್ರಮೋದ್ ಸಿಂಗ್ (35) ಇಂದು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ತುಟಿ ತಿಳಿಸಿದ್ದಾರೆ.
ಸಿಂಗ್ ಬುಧವಾರ ಸಂಜೆ 5 ಗಂಟೆಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದರು. ಅವರ ದೇಹವು ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಜಮೀನು ವಿವಾದದ ಹಿನ್ನೆಲೆಯಲ್ಲಿ ಸಿಂಗ್ ಅವರನ್ನು ಕೊಲೆ ಮಾಡಲಾಗಿದೆ ಮತ್ತು ಆತ್ಮಹತ್ಯೆ ಎಂದು ಬಿಂಬಿಸಲು ಮರಕ್ಕೆ ನೇಣು ಬಿಗಿಯಲಾಗಿದೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.
ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕುಟುಂಬಸ್ಥರು ರಸ್ತೆತಡೆ ನಡೆಸಿದರು. ಸಿಂಗ್ ಮನೆಗೆ ಹಿಂತಿರುಗಿಲ್ಲ ಎಂದು ಕಳೆದ ರಾತ್ರಿ ದೂರು ಕೊಡಲು ಹೋದಾಗ ಮನಾಟು ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ಕಮಲೇಶ್ ಕುಮಾರ್ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಪೊಲೀಸರು ಸಮಯಕ್ಕೆ ಸರಿಯಾಗಿ ಕೆಲಸ ಮಾಡಿದ್ದರೆ, ಸಿಂಗ್ ಉಳಿಯುತ್ತಿದ್ದರು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ಈ ಕುರಿತು ಪೊಲೀಸರು ಮಾತನಾಡಿ, ನಾವು ಪ್ರಕರಣವನ್ನು ಎಲ್ಲಾ ಸಂಭಾವ್ಯ ಆಯಾಮಗಳಿಂದ ತನಿಖೆ ನಡೆಸುತ್ತಿದ್ದೇವೆ. ಮೃತದೇಹವನ್ನು ಮೇದಿನಿನಗರದ ಮೇದಿನಿರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಇದು ಆತ್ಮಹತ್ಯೆಯೋ ಅಥವಾ ಕೊಲೆಯೊ ಎಂದು ಹೇಳಬಹುದು ಎಂದು ಹೇಳಿದ್ದಾರೆ.