ಬೆಂಗಳೂರು;ವಿಧಾನಸಭೆ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದ ಶಾಸಕ ಯು.ಟಿ. ಖಾದರ್ ಅವರಿಗೆ ವಿಧಾನಸಭೆಯಲ್ಲಿ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮಾತನಾಡಿ, ವಿಧಾನಸಭೆಯಲ್ಲಿ ಆರೋಗ್ಯಪೂರ್ಣ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಕೂಡಿದ ಚರ್ಚೆಗಳಾಗುವ ಮೇಲ್ಪಂಕ್ತಿಯನ್ನು ಎತ್ತಿಹಿಡಿಯುವ ಜವಾಬ್ದಾರಿ ಸಭಾಧ್ಯಕ್ಷರ ಮೇಲಿದೆ. ಸದನದ ಘನತೆ, ಗಾಂಭೀರ್ಯ, ಗೌರವ, ಎತ್ತಿಹಿಡಿಯಬೇಕು. ಖಾದರ್ ಅವರ ಮುಂದಾಳ್ವತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ ಎಂದು ಹಾರೈಸಿದ್ದಾರೆ.
ಖಾದರ್ ಅವರು ಸಭಾದ್ಯಕ್ಷರ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುವ ವಿಶ್ವಾಸವಿದೆ. ಅವರು ಬಹಳ ತಾಳ್ಮೆ ಇರುವ ವ್ಯಕ್ತಿ. ಅದು ಈ ಹುದ್ದೆಗೆ ಅಗತ್ಯವಾದ ಗುಣ. ಸದನದಲ್ಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಚರ್ಚೆಗಳಾಗಲಿ. ಅವರಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಆಗ ನನಗೆ ಖಾದರ್ ಆತ್ಮೀಯ ಆಗಿದ್ದವರು, ಈಗ ಸನ್ಮಾನ್ಯ ಸಭಾಧ್ಯಕ್ಷರಾಗಿದ್ದೀರಿ, ನಿಮ್ಮ ಜೊತೆ ಈ ಹಿಂದೆ ಹಲವು ಬಾರಿ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿದೆ ಎಂದು ನೆನಪಿಸಿಕೊಂಡರು.
ಕರ್ನಾಟಕದ ವಿಧಾನಮಂಡಲಕ್ಕೆ ತನ್ನದೇ ಆದ ಇತಿಹಾಸವಿದೆ. ಯು.ಟಿ.ಖಾದರ್ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದಾರೆ. ಯು.ಟಿ.ಖಾದರ್ ವಿಪಕ್ಷ ಉಪನಾಯಕರಾಗಿಯೂ ಉತ್ತಮ ಕೆಲಸ ಮಾಡಿದ್ದಾರೆ.
ನಿಮಗೆ ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವ ಶಕ್ತಿ ನಿಮ್ಮಲ್ಲಿದೆ ಎಂದು ಹೇಳಿದ್ದಾರೆ.