ಬೆಂಗಳೂರು:ಗೋಹತ್ಯೆ ನಿಷೇಧ ಕಾನೂನನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವ ಕರ್ನಾಟಕ ಸರ್ಕಾರದ ಮುಂದಿಲ್ಲ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಬುಧವಾರ ವಿಧಾನ ಪರಿಷತ್ತಿಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಅಕ್ರಮ ಗೋಸಾಗಾಟ ಮಾಡುವವರ ವಿರುದ್ಧ ಕ್ರಮಕೈಗೊಂಡಿಲ್ಲ.ಗೋ ಸಂರಕ್ಷಣೆ ವಿಧೇಯಕ ಹಿಂಪಡೆಯುವ ಬಗ್ಗೆ ಸ್ಪಷ್ಟಪಡಿಸಲಿ ಎಂದು ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಆಗ್ರಹಿಸಿದ್ದರು.
ಇದಕ್ಕೆ ಉತ್ತರಿಸಿದ ಸಚಿವರು, ಕರ್ನಾಟಕ ವಧೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆಯನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಹೇಳಿದ್ದಾರೆ.ಕಾಯ್ದೆಯ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ಗೋ ಹತ್ಯೆ ನಿಷೇಧ ಕಾಯ್ದೆಯು 2021ರಲ್ಲಿ ಜಾರಿಗೆ ಬಂದಿದ್ದು, ಕಾನೂನು ಉಲ್ಲಂಘನೆಗಾಗಿ ಕಠಿಣ ದಂಡ ವಿಧಿಸಲಾಗುತ್ತಿದೆ. ಈ ಕಾಯ್ದೆ ಜಾರಿಗೆ ಬಂದ ನಂತರ ಜಾನುವಾರು ಹತ್ಯೆ ನಿಷೇಧಿಸಲ್ಪಟ್ಟಿದೆ.
ಹಿಂದಿನ ಸರ್ಕಾರ ಜಾರಿಗೆ ತಂದ ತಿದ್ದುಪಡಿಗಳನ್ನು ಸರ್ಕಾರ ರದ್ದುಗೊಳಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಲಿ ಎಂದು ಬಿಜೆಪಿಯ ರವಿಕುಮಾರ್ ಆಗ್ರಹಿಸಿದ್ದರು.
ಈ ವೇಳೆ ಮಾತನಾಡಿದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಗೋಮಾಂಸ ರಫ್ತಿನಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಬಿಜೆಪಿಯು ನಿಜವಾಗಿಯೂ ಗೋಹತ್ಯೆಯನ್ನು ವಿರೋಧಿಸಿದರೆ ಸಾವಿರಾರು ಟನ್ ಗೋಮಾಂಸ ಹೇಗೆ ರಫ್ತಾಗುತ್ತಿದೆ ಎಂಬುದನ್ನು ವಿವರಿಸಿ ಪ್ರಶ್ನಿಸಿದ್ದಾರೆ.