ತುಮಕೂರು:ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಮೇಲೆ ಕಲ್ಲೆಸೆದಿರುವಂತಹ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ನಡೆದಿದೆ.
ಪ್ರಚಾರದ ವೇಳೆ ಜಿ. ಪರಮೇಶ್ವರ್ರನ್ನು ಎತ್ತಿಕೊಂಡು ಕಾರ್ಯಕರ್ತರು ಕುಣಿಯುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಪರಮೇಶ್ವರ್ ಮೇಲೆ ಕಲ್ಲೆಸೆಯಲಾಗಿದೆ ಎನ್ನಲಾಗುತ್ತಿದೆ.
ಕೂಡಲೇ ತಲೆಯನ್ನು ಹಿಡಿದುಕೊಂಡ ಜಿ.ಪರಮೇಶ್ವರ್ ಅವರನ್ನು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ನಂತರ ತುಮಕೂರಿನ ಸಿದ್ದಾರ್ಥ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ವೈದ್ಯ ಚಂದ್ರಶೇಖರ್ ಪ್ರತಿಕ್ರಿಯೆ ನೀಡಿದ್ದು, ಡಾ.ಜಿ.ಪರಮೇಶ್ವರ್ಗೆ ಕಲ್ಲೇಟು ಬಿದ್ದು ತಲೆಗೆ ಗಾಯವಾಗಿದೆ. ತುಮಕೂರಿನ ನಿವಾಸದಲ್ಲಿ ಚಿಕಿತ್ಸೆ ನೀಡಲಾಗಿದೆ. ಪರಮೇಶ್ವರ್ ತಲೆಗೆ ಒಂದೂವರೆ ಇಂಚಿನಷ್ಟು ಗಾಯವಾಗಿದೆ. ಚಿಕಿತ್ಸೆ ಮುಂದುವರಿದಿದೆ ಎಂದು ಹೇಳಿದ್ದಾರೆ.
ಘಟನೆ ಬಳಿಕ ಡಾ.ಜಿ.ಪರಮೇಶ್ವರ್ ನಿವಾಸದ ಬಳಿ ಕಾರ್ಯಕರ್ತರು ಜಮಾಯಿಸುತ್ತಿದ್ದಾರೆ.ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.