ರಿಕ್ಷಾದಲ್ಲಿ ಹೋಗುತ್ತಿದ್ದಾಗ ಮೊಬೈಲ್ ಕಸಿದುಕೊಳ್ಳಲು ಯತ್ನ, ಮೊಬೈಲ್ ಹಿಡಿದಿಟ್ಟುಕೊಳ್ಳಲು ಯತ್ನಿಸುವಾಗ ರಿಕ್ಷಾದಿಂದ ಬಿದ್ದು ಯುವತಿ ಸಾವು; ಆರೋಪಿಗೆ ಎನ್ ಕೌಂಟರ್
ಉತ್ತರಪ್ರದೇಶ; ಘಾಜಿಯಾಬಾದ್ನಲ್ಲಿ 19 ವರ್ಷದ ಯುವತಿಯ ಸಾವಿಗೆ ಕಾರಣವಾಗಿದ್ದ ಮೊಬೈಲ್ ದರೋಡೆ ಪ್ರಕರಣದ ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ.
ಘಾಜಿಯಾಬಾದ್ನ ಮಿಶಾಲ್ ಗರ್ಹಿ ಎಂಬಲ್ಲಿನ ನಿವಾಸಿ ಆರೋಪಿ ಜಿತೇಂದ್ರ ಅಲಿಯಾಸ್ ಜೀತು ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಇಬ್ಬರು ವ್ಯಕ್ತಿಗಳು ಬೈಕ್ನಲ್ಲಿ ಬರುತ್ತಿರುವುದನ್ನು ಕಂಡು ಚೆಕ್ಪಾಯಿಂಟ್ನಲ್ಲಿದ್ದ ಪೊಲೀಸರು ನಿಲ್ಲಿಸಲು ಸೂಚಿಸಿದ್ದಾರೆ.
ಪೊಲೀಸರ ಸೂಚನೆ ಲೆಕ್ಕಿಸದೆ ವೇಗವಾಗಿ ಪರಾರಿಯಾಗಲು ಯತ್ನಿಸಿದ್ದು ಮಾತ್ರವಲ್ಲದೆ ಪೊಲೀಸರ ಮೇಲೆಯೇ ಗುಂಡು ಹಾರಿಸಿದ್ದಾರೆ.
ಈ ಸಂದರ್ಭದಲ್ಲಿ ಒಬ್ಬ ಅಧಿಕಾರಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಆರೋಪಿಗೆ ಗುಂಡು ತಗುಲಿದೆ. ಆತನೊಂದಿಗಿದ್ದ ಇನ್ನೊಬ್ಬ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಾಳು ಆರೋಪಿಯನ್ನು ಆಸ್ಪತ್ರೆಗೆ ಸೇರಿಸಿದ್ದು, ಆತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ವಿವರ ನೀಡಿದರು
ಮೃತನ ವಿರುದ್ಧ ಈ ಹಿಂದೆ 12 ಪ್ರಕರಣಗಳು ದಾಖಲಾಗಿವೆ. ಅವುಗಳ ಪೈಕಿ 6ಕ್ಕೂ ಹೆಚ್ಚು ದರೋಡೆ ಪ್ರಕರಣಗಳಿವೆ.
ಅಕ್ಟೋಬರ್ 27ರಂದು ಘಾಜಿಯಾಬಾದ್ನ ಎಬಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಬಿ.ಟೆಕ್ ವಿದ್ಯಾರ್ಥಿನಿ ಕೀರ್ತಿ ಸಿಂಗ್ (19) ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಬೈಕ್ನಲ್ಲಿ ಬಂದ ಇಬ್ಬರು ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ದುಷ್ಕರ್ಮಿಗಳಿಂದ ಮೊಬೈಲ್ ಕಾಪಾಡಿಕೊಳ್ಳುವ ಪ್ರಯತ್ನದಲ್ಲಿ ಕೀರ್ತಿ ಆಟೋದಿಂದ ಕೆಳಗೆ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಮೃತಪಟ್ಟಿದ್ದರು.