ಬೆಂಗಳೂರು;‘ಗೃಹಲಕ್ಷ್ಮಿ ಯೋಜನೆ’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಬುಧವಾರ ವಿಧಾನಸೌಧದಲ್ಲಿ ಚಾಲನೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆಯ ಲಾಂಛನ ಮತ್ತು ಪೋಸ್ಟರ್ ಅನಾವರಣಗೊಳಿಸಿದ್ದು, ಸಚಿವ ಮುನಿಯಪ್ಪ ಉಪಸ್ಥಿತರಿದ್ದರು.
ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳ ನೋಂದಣಿಗೆ ಗುರುತಿಸಲ್ಪಟ್ಟಿರುವ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ, ನಗರ ಸ್ಥಳೀಯ ಆಡಳಿತ ಕಚೇರಿ ಕೇಂದ್ರಗಳ ಮೇಲ್ವಿಚಾರಣೆಯನ್ನು ನಿರ್ವಹಿಸಲು ಓರ್ವ ಸರಕಾರಿ ಅಧಿಕಾರಿ, ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗಿದ್ದು, ಪಡಿತರ ಚೀಟಿಯ ಸಂಖ್ಯೆಯನ್ನು 8147500500 ಸಂಖ್ಯೆಗೆ ಮೊಬೈಲ್ ಮೂಲಕ ಎಸ್ಎಂಎಸ್ ಮಾಡಬಹುದಾಗಿದೆ.
ಕೂಡಲೇ ಮನೆಯ ಮುಖ್ಯಸ್ಥೆಗೆ ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಎಸ್ಎಂಎಸ್ ಸಂದೇಶ ಹೋಗುತ್ತದೆ. ಈ ಬಗ್ಗೆ ಗೊಂದಲ ಉಂಟಾದರೆ, 1902 ನಂಬರ್ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಲು ಸೂಚಿಸಲಾಗಿದೆ.
ಇನ್ನು ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಯ ಹೆಸರು ನೋಂದಣಿ ಕಾರ್ಯ ಆರಂಭಗೊಂಡಿದ್ದು, ಜಿಲ್ಲೆಯ ಎಲ್ಲ ಅರ್ಹರು ಈ ಯೋಜನೆಯಡಿ ನೋಂದಾಯಿಸಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕರೆ ನೀಡಿದ್ದಾರೆ.