ಮೈಸೂರು:ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ನಜರಾಬಾದ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.
ಪ್ರಕರಣದಲ್ಲಿ ಶರಣರು ಮೊದಲ ಆರೋಪಿಯಾಗಿದ್ದು, ಚಿತ್ರದುರ್ಗದಲ್ಲಿ ಮಠ ನಡೆಸುತ್ತಿರುವ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್ ರಶ್ಮಿ ಎರಡನೇ ಆರೋಪಿಯಾಗಿದ್ದಾರೆ. ಮಠದ ಬಸವಾದಿತ್ಯ ಮೂರನೇ ಆರೋಪಿ.ಮಠದ ಭಕ್ತರೆನ್ನಲಾದ ಮೈಸೂರಿನ ಪರಮಶಿವಯ್ಯ ಮತ್ತು ವಕೀಲ ಗಂಗಾಧರಯ್ಯ ಕ್ರಮವಾಗಿ ನಾಲ್ಕು ಮತ್ತು ಐದನೇ ಆರೋಪಿಗಳು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ.ಚಂದ್ರಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬರನ್ನು ಶರಣರು ಮೂರೂವರೆ ವರ್ಷಗಳಿಂದ,ಮತ್ತೊಬ್ಬರನ್ನು ಒಂದೂವರೆ ವರ್ಷದಿಂದ ಲೈಂಗಿಕವಾಗಿ ದೌರ್ಜನ್ಯ ಮಾಡುತ್ತಿರುವುದಾಗಿ, ಅದಕ್ಕೆ ಉಳಿದ ಆರೋಪಿಗಳು ಸಹಕರಿಸಿರುವುದಾಗಿ ವಿದ್ಯಾರ್ಥಿನಿಯರು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತಸಮಾಲೋಚನೆ ಸಮಯದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಚಿತ್ರದುರ್ಗದ ಮುರುಘಾಮಠದಲ್ಲಿರುವ ಬಾಲಕಿಯರನ್ನು ಮಹಿಳಾ ವಾರ್ಡನ್,ಸ್ವಾಮೀಜಿಗಳಿಗೆ ಹಣ್ಣು ಕೊಟ್ಟು ಬನ್ನಿ ಎಂದು ಕಳುಹಿಸುತ್ತಿದ್ದರು. ತಮ್ಮ ಬಳಿ ಬಂದ ವಿದ್ಯಾರ್ಥಿನಿಯರನ್ನು ಸ್ವಾಮೀಜಿ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದರು ಎನ್ನಲಾಗಿದೆ.