ಕಲಬುರಗಿ;ಚುನಾವಣಾ ಅಧಿಕಾರಿಯೊಬ್ಬರು ವೃದ್ಧ ಮಹಿಳೆಗೆ ವಂಚಿಸಿ ಬಿಜೆಪಿ ಪರ ಬಟನ್ ಒತ್ತಿದ ಆರೋಪದ ಮೇರೆಗೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಕೊನೆಗೆ ಮತದಾರರ ಮೇಲೆ ಪ್ರಭಾವ ಬೀರಲು ಯತ್ನಿಸಿದ ಆರೋಪದ ಮೇರೆಗೆ ಅಧಿಕಾರಿಯನ್ನು ಬದಲಾಯಿಸಲಾಗಿದೆ ಎಂದು ಹೇಳಲಾಗಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಚಾಮನೂರು ಗ್ರಾಮದಲ್ಲಿ ಚುನಾವಣಾ ಅಧಿಕಾರಿ ಬಿ.ಸಿ. ಚವ್ಹಾಣ ಎಂಬವರ ಮೇಲೆ ಈ ಆರೋಪ ಕೇಳಿ ಬಂದಿದೆ.
ಬಸಮ್ಮ ಎಂಟುಮನ್ ಎಂಬ ಮಹಿಳೆ ಮತಗಟ್ಟೆಗೆ ಹೋಗಿ ಕಾಂಗ್ರೆಸ್ ಅಭ್ಯರ್ಥಿಯ ಚಿಹ್ನೆಗೆ ಬಟನ್ ಒತ್ತಲು ತಿಳಿಸಿದ್ದಾರೆ. ಆದರೆ ಚುನಾವಣಾಧಿಕಾರಿ ಬಿಜೆಪಿ ಅಭ್ಯರ್ಥಿಯ ಮುಂದಿರುವ ಬಟನ್ ಒತ್ತಿದ್ದಾರೆ. ಅದು ಮಹಿಳೆ ಗಮನಕ್ಕೆ ಬಂದು ಆಕ್ಷೇಪ ವ್ಯಕ್ತಪಡಿಸಿದಾಗ ಘಟನೆ ಬಯಲಿಗೆ ಬಂದಿದೆ.
ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ನಂತರ ಚಿತ್ತಾಪುರ ಚುನಾವಣಾಧಿಕಾರಿ ನವೀನ್ ಕುಮಾರ್ ಯು. ಅಧಿಕಾರಿಯನ್ನು ಬದಲಾಯಿಸಿದ್ದಾರೆ.
ಇದೇ ವಿಚಾರವಾಗಿ ಟ್ವೀಟ್ ಕೂಡ ಮಾಡಿರುವ ಪ್ರಿಯಾಂಕ್ ಖರ್ಗೆ, ಮತಗಟ್ಟೆ ಅಧಿಕಾರಿ ಬಿಜೆಪಿ ಪರ ಮತದಾರರನ್ನು ಸೆಳೆಯಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಸ್ತುತ ಆರೋಪಿ ಅಧಿಕಾರಿಯನ್ನು ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ ಎನ್ನಲಾಗಿದೆ.