ಸಚಿವರ ಮೇಲೆ ಅರಿಶಿನ ಎರಚಿದ ಪ್ರತಿಭಟನಾಕಾರ; ಭದ್ರತಾ ಸಿಬ್ಬಂದಿಗಳಿಂದ ಥಳಿತ

ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದ ಪ್ರತಿಭಟನಾಕಾರ ಮಹಾರಾಷ್ಟ್ರದ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್​ ಮೇಲೆ ಅರಿಶಿನ ಎರಚಿದ ಘಟನೆ ನಡೆದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಪ್ರಕರಣದ ಸಂಬಂಧ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್​ ಸೊಲ್ಲಾಪುರದಲ್ಲಿರುವ ಸರ್ಕಾರಿ ಗೆಸ್ಟ್​​ ಹೌಸ್​ನಲ್ಲಿ ಮೀಸಲಾತಿಗೆ ಒತ್ತಾಯಿಸಿ ದಂಗರ್​ (ಕುರುಬ) ಸಮುದಾಯದ ಪ್ರಮುಖರೊಂದಿಗೆ ಸಭೆ ನಡೆಸುತ್ತಿದ್ದರು.

ಈ ವೇಳೆ ಸಭೆಯಲ್ಲಿ ಹಾಜರಿದ್ದ ಸಮುದಾಯದ ಮುಖಂಡನೋರ್ವ ಏಕಾಏಕಿ ಸಚಿವರ ಮೇಲೆ ಅರಿಶಿನವನ್ನು ಎರಚಿ ಮೀಸಲಾತಿ ನೀಡುವಂತೆ ಘೋಷಣೆಗಳನ್ನು ಕೂಗಿದ್ದಾರೆ.

ಈ ವೇಳೆ ಅಲ್ಲಿದ್ದ ಸಚಿವರ ಬೆಂಲಿಗರು ಹಾಗೂ ಅವರ ಅಂಗರಕ್ಷಕರು ಕೂಡಲೇ ಆ ವ್ಯಕ್ತಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಂಧಿತನನ್ನು ಶೇಖರ್​ ಬಂಗಲೆ ಎಂದು ಗುರುತಿಸಲಾಗಿದ್ದು, ತನ್ನ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಈ ರೀತಿ ಮಾಡಿದ್ದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್