ಮಹಾರಾಷ್ಟ್ರದಲ್ಲಿ ಪ್ರಬಲವಾಗಿರುವ ಶಿವಸೇನೆ ಪಕ್ಷ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ಮತಗಳನ್ನು ಸೆಳೆಯುವ ಸಾಧ್ಯತೆ ಇದೆ.
ಶಿವಸೇನೆ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿದೆ.
ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣದ ಶಿವ ಸೇನೆಯಿಂದ 150ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಬಿಜೆಪಿ ಮಹಾರಾಷ್ಟ್ರದಲ್ಲಿ ಮಾಡಿದ ರಾಜಕೀಯ ಆಟಕ್ಕೆ ಸೇಡು ತೀರಿಸಿಕೊಳ್ಳಲು ಮುಂದಾಗಿದೆ ಎನ್ನಲಾಗಿದೆ.
ಶಿವಸೇನೆ ಸ್ಪರ್ಧೆ ಬಗ್ಗೆ ರಾಜ್ಯಾಧ್ಯಕ್ಷ ಕುಮಾರ್ ಹಕಾರಿ ಮಾಹಿತಿ ನೀಡಿದ್ದು,ಪಕ್ಷದಲ್ಲಿನ ಕೆಲ ಗೊಂದಲಗಳು ಪರಿಹಾರವಾದ ಕೂಡಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ.ಸೋಮವಾರ ಅಥವಾ ಮಂಗಳವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.
ಕಳೆದ ಬಾರಿ 60 ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಾಗಿತ್ತು. ಈ ಬಾರಿ 150 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇವೆ. ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಸಮಾನ ಅಂತರ ಕಾಯ್ದುಕೊಂಡು ಚುನಾವಣೆ ಎದುರಿಸುತ್ತೇವೆ. ಮಹಾರಾಷ್ಟ್ರದಲ್ಲಿ ಷಡ್ಯಂತ್ರ ಮಾಡಿದ್ದಾರೆ.ಅವರಿಗೆ ಮರಳಿ ತಕ್ಕ ಉತ್ತರ ಕೊಡುತ್ತೇವೆ.ಶಿವಸೇನೆಯ ಪ್ರಬಲ ನಾಯಕರು ರಾಜ್ಯದಲ್ಲಿ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಇದೇ ವೇಳೆ ಅವರು ಹೇಳಿದ್ದಾರೆ.