ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಎಲ್ಲಾ ಕಾರ್ಯಕ್ರಮಗಳು ಪುನರಾರಂಭ ಮಾಡಲಾಗುವುದು- ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗವು ಇಂದು ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ವೇಳೆ ಸಿಎಂ ಈ ಭರವಸೆ ನೀಡಿದ್ದಾರೆ.

ಸರ್ಕಾರ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಳೆದ ಐದು ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ಸಮುದಾಯ ವಂಚಿತವಾಗಿದ್ದು, ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ನಿಗಮಗಳಲ್ಲಿ ಅನುದಾನ ಹೆಚ್ಚಳ, ವಸತಿಶಾಲೆ, ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸುವ ಕುರಿತು ಬೇಡಿಕೆಗಳನ್ನು ಸಲ್ಲಿಸಲಾಯಿತು.

ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಚಾವಡಿಯ ಅಧ್ಯಕ್ಷ ಮುಜಾಫರ್ ಅಸಾದಿ, ಮಸ್ತಾನ್ ಬಿರಾದರ್, ಬಾನು ಮುಷ್ತಾಖ್, ರಹಮತ್ ತರೀಕೆರೆ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್